ನವದೆಹಲಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನ ವಾಪಸ್ ಪಡೆಯಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಮಹತ್ವದ ನಿರ್ಧಾರವನ್ನ ಪ್ರಕಟಿಸಿದ್ದಾರೆ.
ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ನಮ್ಮ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಅದರಲ್ಲೂ ವಿಶೇಷವಾಗಿ ಸಣ್ಣ ರೈತರ ಕಲ್ಯಾಣಕ್ಕಾಗಿ, ದೇಶದ ಕೃಷಿ ದೃಷ್ಟಿಯಿಂದ, ದೇಶದ ಹಿತದೃಷ್ಟಿಯಿಂದ, ಹಳ್ಳಿಯ ಬಡವರ ಉಜ್ವಲ ಭವಿಷ್ಯಕ್ಕಾಗಿ ಪ್ರಾಮಾಣಿಕತೆಯಿಂದ ಈ ಕಾನೂನನ್ನು ತಂದಿದ್ದೇವು.
ಅಂತಹ ಪವಿತ್ರವಾದ, ಸಂಪೂರ್ಣ ಶುದ್ಧವಾದ, ರೈತರ ಅನುಕೂಲಕ್ಕಾಗಿ, ನಾವು ಪ್ರಯತ್ನಿಸಿದರೂ ಅದನ್ನು ಕೆಲವು ರೈತರಿಗೆ ವಿವರಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ನಾವು ಎಲ್ಲಾ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧರಿಸಿದ್ದೇವೆ ಎಂದು ಹೇಳಲು ಬಯಸುತ್ತೇನೆ ಎಂದರು.
ಈ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಲು ನಾವು ನಿರ್ಧರಿಸಿದ್ದೇವೆ ಎಂದು ಇಡೀ ದೇಶಕ್ಕೆ ಹೇಳಲು ನಾನು ಬಂದಿದ್ದೇನೆ. ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಸಾಂವಿಧಾನಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತೇವೆ ಎಂದು ತಿಳಿಸಿದರು.
ಯಾವುದು ನೂತನ ಕೃಷಿ ಕಾಯ್ದೆಗಳು…?
- ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020
- ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020
- ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020
ಇದಕ್ಕೂ ಮುನ್ನ ಮಾತನಾಡಿದ ಅವರು.. ಇಂದು ಗುರುನಾನಕ್ ದೇವ್ ಜಿ ಅವರ ಪವಿತ್ರ ಹಬ್ಬ. ಈ ಸಂದರ್ಭದಲ್ಲಿ ನಾನು ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಒಂದೂವರೆ ವರ್ಷಗಳ ಬಳಿಕ ಕರ್ತಾರ್ಪುರ ಕಾರಿಡಾರ್ ಪುನರಾರಂಭಗೊಂಡಿರೋದು ತುಂಬಾ ಸಂತಸ ತಂದಿದೆ ಎಂದರು.
ನನ್ನ ಐದು ದಶಕಗಳ ಜೀವನದಲ್ಲಿ ರೈತರ ಸವಾಲುಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. 2014 ರಿಂದ ಪ್ರಧಾನ ಸೇವಕರಾಗಿ ಸೇವೆ ಸಲ್ಲಿಸಲು ಅವಕಾಶವನ್ನು ಮಾಡಿಕೊಟ್ಟಿದ್ದಾರೆ. ನಾವು ಕೃಷಿ, ರೈತರನ್ನು ಅಭಿವೃದ್ಧಿಪಡಿಸಿದ್ದೇವೆ. ರೈತರ ಕಲ್ಯಾಣಕ್ಕೆ ಆದ್ಯತೆ ನೀಡಲಾಗಿದೆ ಅಂತಾ ತಿಳಿಸಿದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post