/newsfirstlive-kannada/media/post_attachments/wp-content/uploads/2024/03/YATNAL.jpg)
ಬೆಂಗಳೂರು: ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ. ಉಪಕಾರ ಮಾಡಿದರೆ ಅಪಕರಿಸುವ ಕಾಲ. ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ. ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ. ಸತ್ಯವಂತರಿಗಿದು ಕಾಲವಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಪಕ್ಷದ ಒಳಗಿನ ಸರ್ವಾಧಿಕಾರ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ ಆರು ವರ್ಷ ಉಚ್ಛಾಟನೆ ಮಾಡಿದ್ದಾರೆ. ಪಕ್ಷದ ಒಳಗಿನ ಕೆಲ ಪಟ್ಟಭದ್ರ ಹಿತಾಸಕ್ತಿಗಳು ತಮ್ಮ ಅಜೆಂಡಾ ಯಶಸ್ವಿಯಾಗಿ ಸಾಧಿಸಿಕೊಂಡಿವೆ. ಈ ಉಚ್ಛಾಟನೆಯಿಂದ ನಾನು ನನ್ನ ಹೋರಾಟ ನಿಲ್ಲಿಸಲ್ಲ, ಕುಂದಲ್ಲ. ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಹಾಗೂ ಹಿಂದುತ್ವ ಮತ್ತು ಉತ್ತರ ಕರ್ನಾಟಕ ಪರ ನನ್ನ ಹೋರಾಟ ನಿರಂತರ ಇರುತ್ತದೆ ಎಂದಿದ್ದಾರೆ ಯತ್ನಾಳ್.
ಯತ್ನಾಳ್ ಉಚ್ಚಾಟನೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.
ಇನ್ನು, ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟನೆ ಮಾಡಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: ಬಿಜೆಪಿಯಿಂದ ಬಸನಗೌಡ ಯತ್ನಾಳ್ ಉಚ್ಚಾಟನೆ; ಪಕ್ಷದಿಂದ ಹೊರಹಾಕಲು ಕಾರಣವೇನು?
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ