ಇದು ಗಾಂಧಿ, ಬಸವಣ್ಣನ ಕಾಲ ಅಲ್ಲ - ಸಿಂಧೂರ ಇಟ್ಕೊಂಡು ಭಾರತದ ಬಗ್ಗೆ ಸಿಎಂ ಏನಂದ್ರು..?

author-image
Veena Gangani
Updated On
ಇದು ಗಾಂಧಿ, ಬಸವಣ್ಣನ ಕಾಲ ಅಲ್ಲ - ಸಿಂಧೂರ ಇಟ್ಕೊಂಡು ಭಾರತದ ಬಗ್ಗೆ ಸಿಎಂ ಏನಂದ್ರು..?
Advertisment
  • ಇಡೀ ರಾಜ್ಯದ ಪರವಾಗಿ ಸೇನೆಗೆ ಸಿಎಂ ಅಭಿನಂದನೆ ಸಲ್ಲಿಕೆ
  • ಹಣೆಗೆ ಸಿಂಧೂರ ಇಟ್ಟುಕೊಂಡು ಸುದ್ದಿಗೋಷ್ಠಿ ನಡೆಸಿದ ಸಿಎಂ
  • ಸುದ್ದಿಗೋಷ್ಠಿಯಲ್ಲಿ ಪಾಕಿಸ್ಥಾನಕ್ಕೆ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ. ವಿಶೇಷ ಎಂದರೆ ಸಿಎಂ ಸಿದ್ದರಾಮಯ್ಯ ಅವರು ಹಣೆಗೆ ಸಿಂಧೂರ ಇಟ್ಟುಕೊಂಡು ಬಂದು, ಇದು ಗಾಂಧಿ, ಬಸವಣ್ಣನ ಕಾಲವಲ್ಲ, ಈಗ ಕಾಲ ಬದಲಾಗಿದೆ. ಅವರು ಕಾಲು ಕೆರೆದು ಜಗಳಕ್ಕೆ ಬಂದರೆ ಸುಮ್ಮನೆ ಇರಲು ಆಗುತ್ತಾ ಎಂದಿದ್ದಾರೆ.

ಇದನ್ನೂ ಓದಿ: ವಾಯುಪಡೆಯಿಂದ ಮತ್ತೊಂದು ಅಟ್ಯಾಕ್.. ಪಾಕ್​​ಗೆ ಚೀನಾ ನೀಡಿದ್ದ ಯುದ್ಧ ವಿಮಾನ JF-17 ಉಡೀಸ್..! VIDEO

publive-image

ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆಯೂ ಉಗ್ರದ ಶಿಬಿರಗಳನ್ನೇ ಗುರಿಯಾಗಿಸಿಕೊಂಡು 9 ನೆಲೆಗಳ ಮೇಲೆ ದಾಳಿ ಮಾಡಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತಾಡೋಕೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಣೆಗೆ ಸಿಂಧೂರ ಇಟ್ಟುಕೊಂಡು ಎಂಟ್ರಿ ಕೊಟ್ಟಿದ್ದಾರೆ.

ಇನ್ನೂ, ಇದೇ ವೇಳೆ ಸುದ್ದಿಗೋಷ್ಟಿಯಲ್ಲಿ ಸಿಂಧೂರ ಇಟ್ಟುಕೊಂಡು ಬಂದಿರೋ ಬಗ್ಗೆ ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ಹಾಗೇನೂ ಇಲ್ಲ, ಇಲ್ಲಿಗೆ ಬರುವ ಮೊದಲು ಪಟಾಲಮ್ಮ ದೇವಾಲಯಕ್ಕೆ ಹೋಗಿದ್ದೆ. ಅಲ್ಲಿ ದೇವರ ದರ್ಶನ ಮಾಡಿದ ನಂತರ ಸಿಂಧೂರ ಇಟ್ಟುಕೊಂಡು ಬಂದಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಈ ಬಗ್ಗೆ ಮಾತಾಡಿದ ಸಿಎಂ, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮೊದಲಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂ ಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ. ಈ ಸೇನಾದಾಳಿ ನಡೆಸದೆ ಭಾರತದ ಮುಂದೆ ಬೇರೆ ಆಯ್ಕೆಗಳಿರಲಿಲ್ಲ. ಪಹಲ್ಗಾಮ್ ನಲ್ಲಿ ನಡೆದ ಹತ್ಯಾಕಾಂಡ ನಡೆಸಿದ ಉಗ್ರಗಾಮಿಗಳು ಪಾಕಿಸ್ತಾನಕ್ಕೆ ಸೇರಿದವರೆಂದು ಜಗಜ್ಜಾಹೀರಾಗಿದ್ದರೂ. ಪಾಕಿಸ್ತಾನ ಇದನ್ನು ಒಪ್ಪಿಕೊಂಡು ಕ್ರಮಕೈಗೊಳ್ಳುವ ಭರವಸೆ ನೀಡದೆ ಹಠಮಾರಿ ಧೋರಣೆ ತಳೆದಿರುವ ಕಾರಣದಿಂದಾಗಿ ಭಾರತಕ್ಕೂ ಈ ದಾಳಿ ನಡೆಸದೆ ಬೇರೆ ಆಯ್ಕೆಗಳಿರಲಿಲ್ಲ.

ಉಗ್ರಗಾಮಿಗಳ ನೆಲೆಗಳನ್ನು ಧೂಳೀಪಟ ಮಾಡಿ ಉಗ್ರರನ್ನು ಶಿಕ್ಷಿಸಿದ ನಮ್ಮ ಸೈನಿಕರ ಧೀರೋದ್ದಾತ ಪರಾಕ್ರಮದಿಂದ ಪಹಲ್ಗಾಮ್ ಹತ್ಯಾಕಾಂಡದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬಗಳಿಗೆ ತುಸು ನೆಮ್ಮದಿ, ಸಮಾಧಾನ ಸಿಕ್ಕಿರಬಹುದೆಂದು ಭಾವಿಸಿದ್ದೇನೆ. ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ. ಉಗ್ರಗಾಮಿಗಳ ನೆಲೆಯನ್ನೇ ಕೇಂದ್ರವಾಗಿಟ್ಟುಕೊಂಡು ಅಮಾಯಕ ಜನರ ಸಾವು-ನೋವು ನಡೆಯದಂತೆ ದಾಳಿ ನಡೆಸಿರುವ ನಮ್ಮ ಸೈನಿಕರ ಕಾರ್ಯಕ್ಷಮತೆ ಮತ್ತು ಪರಿಣತಿಗೆ ನನ್ನದೊಂದು ದೊಡ್ಡ ಸಲಾಮ್. ಭಾರತ ಸರ್ಕಾರ ಕೈಗೊಂಡಿರುವ ಈ ನಿರ್ಧಾರವನ್ನು ನಮ್ಮ ಪಕ್ಷ ಸಂಪೂರ್ಣ ಬೆಂಬಲಿಸಿದೆ. ನಾನು ಕೂಡಾ ನಮ್ಮ ಸರ್ಕಾರ ಮತ್ತು ರಾಜ್ಯದ ಪರವಾಗಿ ಸಂಪೂರ್ಣ ಬೆಂಬಲ ಘೋಷಿಸುತ್ತಿದ್ದೇನೆ. ಇದು ನಾವೆಲ್ಲರೂ ಒಗ್ಗಟ್ಟಿನಿಂದ ಮತ್ತು ಅಷ್ಟೇ ಎಚ್ಚರದಿಂದ ಇರುವ ಕಾಲ. ರಾಜ್ಯದ ಭದ್ರತಾ ವ್ಯವಸ್ಥೆ ಮೇಲೆ ನಿಗಾ ಇಡುವಂತೆ ಪೊಲೀಸ್ ವರಿಷ್ಠರಿಗೆ ತಿಳಿಸಿದ್ದೇನೆ. ನಮ್ಮ ಸರ್ಕಾರ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಸಂಪರ್ಕದಲ್ಲಿರುತ್ತದೆ. ಅಲ್ಲಿಂದ ಬರುವ ಸೂಚನೆಗಳನ್ನು ಪಾಲಿಸಲಾಗುತ್ತದೆ. ಯಾರೂ ಭಯಭೀತರಾಗುವ ಅವಶ್ಯಕತೆ ಇಲ್ಲ. ಕಟ್ಟುನಿಟ್ಟಿನ ಕ್ರಮಗಳೊಂದಿಗೆ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲಾಗುವುದು ಎಂದಿದ್ದಾರೆ. ಹೀಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಇದು ಗಾಂಧಿ, ಬಸವಣ್ಣನ ಕಾಲ ಅಲ್ಲ. ಈಗ ಕಾಲ ಬದಲಾಗಿದೆ. ಅವರು (ಪಾಕಿಸ್ತಾನ) ಕಾಲು ಕೆರೆದು ಜಗಳಕ್ಕೆ ಬಂದರೆ ಸುಮ್ಮನೆ ಇರಲು ಆಗುತ್ತಾ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment