/newsfirstlive-kannada/media/post_attachments/wp-content/uploads/2025/05/Col-Sofiya.jpg)
ಬೆಳಗಾವಿ: ‘ಆಪರೇಷನ್ ಸಿಂಧೂರ’ ಮೂಲಕ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆ ಯಶಸ್ವಿಯಾಗಿ ಸೇಡು ತೀರಿಸಿಕೊಂಡಿದೆ. ಪಿಓಕೆ ಹಾಗೂ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ 9 ನೆಲೆಗಳ ಮೇಲೆ ಕ್ಷಿಪಣಿ ದಾಳಿ ಮೂಲಕ ಉಡೀಸ್ ಮಾಡಿದೆ.
ಇದನ್ನೂ ಓದಿ:ಪಾಕ್ಗೆ ಮತ್ತೊಂದು ರೀತಿಯಲ್ಲಿ ಕೌಂಟರ್.. ಆಪರೇಷನ್ ಸಿಂಧೂರ ಬಗ್ಗೆ ತಿಳಿಸಲು ಬಂದ ಈ ಅಧಿಕಾರಿಗಳು ಯಾರು?
ವಿಶೇಷ ಅಂದರೆ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಸೇನಾಧಿಕಾರಿಗಳ ನೇತೃತ್ವದಲ್ಲಿ ಭಾರತೀಯ ಸೇನೆ ಸುದ್ದಿಗೋಷ್ಠಿ ನಡೆಸಿದೆ. ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ (Wing Commander Vyomika Singh) ಹಾಗೂ ಕರ್ನಲ್ ಸೋಫಿಯಾ ಖುರೇಷಿ (Colonel Sophia Qureshi) ಸುದ್ದಿಗೋಷ್ಠಿಯ ನೇತೃತ್ವ ವಹಿಸಿದ್ದರು. ಆಪರೇಷನ್ ಸಿಂಧೂರ ಬಗ್ಗೆ ಮಾಹಿತಿ ನೀಡಲು ಭಾರತೀಯ ಸೇನೆ ಇಬ್ಬರು ಮಹಿಳಾ ಸೇನಾಧಿಕಾರಿಗಳನ್ನೇ ಕಳುಹಿಸಿ, ಪಾಕ್ಗೆ ಮತ್ತೊಂದು ರೀತಿಯಲ್ಲಿ ಕೌಂಟರ್ ಕೊಡಲಾಗಿದೆ. ಮತ್ತೊಂದು ಹೆಮ್ಮೆಯ ವಿಚಾರ ಏನೆಂದರೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಗ್ಗೆ ಎಳೆ ಎಳೆಯಾಗಿ ಮಾಹಿತಿ ಬಿಚ್ಚಿಟ್ಟಿದ್ದು ಬೇರೆ ಯಾರು ಅಲ್ಲ, ಅವರೇ ಬೆಳಗಾವಿಯ ಸೊಸೆ.
ಹೌದು, ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ. ಬಹುರಾಷ್ಟ್ರೀಯ ಸೇನಾ ತುಕಡಿಯನ್ನು ಮುನ್ನಡೆಸಿದ ಮೊದಲ ಭಾರತೀಯ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಸೋಫಿಯಾ ಪತಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದವರು. ಸೋಫಿಯಾ ಪತಿಯ ಹೆಸರು ತಾಜುದ್ದೀನ್ ಬಾಗೇವಾಡಿ. ಪತಿ ಹಾಗೂ ಪತ್ನಿ ಇಬ್ಬರೂ ಭಾರತೀಯ ಸೇನೆಯಲ್ಲಿ ಕರ್ನಲ್ ಆಗಿ ದೇಶ ಸೇವೆ ಮಾಡ್ತಿದ್ದಾರೆ. ಸೋಫಿಯಾ ಪತಿ ತಾಜುದ್ದೀನ್ ಬಾಗೇವಾಡಿ ಸಹ ಕರ್ನಲ್ ಆಗಿದ್ದಾರೆ. 2015ರಲ್ಲಿ ಈ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಸದ್ಯ ಸೋಫಿಯಾ ಜಮ್ಮುವಿನಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತಿ ತಾಜುದ್ದೀನಿ ಬಾಗೇವಾಡಿ ಸಹ ಜಾನ್ಸಿಯಲ್ಲಿ ಕರ್ನಲ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇನ್ನೂ, ಸೋಫಿಯಾ ಖುರೇಷಿ ಮೂಲತಃ ಗುಜರಾತ್ನವರು. ಇವರು 1981ರಲ್ಲಿ ಗುಜರಾತ್ನ ವಡೋದರಾದಲ್ಲಿ ಜನಿಸಿದ್ದರು. ಇವರು ಜೀವರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸೋಫಿಯಾ ಅಜ್ಜ ಕೂಡ ಭಾರತೀಯ ಸೇನೆಯಲ್ಲಿದ್ದರು. ಅವರ ತಂದೆ ಕೂಡ ಕೆಲವು ವರ್ಷಗಳ ಕಾಲ ಸೈನ್ಯದಲ್ಲಿ ಧಾರ್ಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. 2016ರಲ್ಲಿ ಬಹುರಾಷ್ಟ್ರೀಯ ಮಿಲಿಟರಿ ಕವಾಯತಿನಲ್ಲಿ ಭಾರತೀಯ ತುಕಡಿಯನ್ನು ಮುನ್ನಡೆಸಿ ಗಮನ ಸೆಳೆದಿದ್ದರು. ನಂತರ ಅವರು ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿಯಾದರು. ಸೋಫಿಯಾ ಖುರೇಷಿ 1999ರಲ್ಲಿ ಭಾರತೀಯ ಸೇನೆಗೆ ಸೇರಿದರು.
ಚೆನ್ನೈನ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ತರಬೇತಿ ಪಡೆದರು. ನಂತರ ಸೈನ್ಯದಲ್ಲಿ ಲೆಫ್ಟಿನೆಂಟ್ ಆಗಿ ಸೋಫಿಯಾ ನೇಮಕಗೊಂಡರು. ಸೋಫಿಯಾ 2006ರಲ್ಲಿ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯಲ್ಲಿ ಮಿಲಿಟರಿ ವೀಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ. 2010ರಿಂದ ಮತ್ತೆ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಪಂಜಾಬ್ ಗಡಿಯಲ್ಲಿ ಆಪರೇಷನ್ ಪರಾಕ್ರಮ್ ಸಮಯದಲ್ಲಿ ಸಲ್ಲಿಸಿದ್ದ ಸೇವೆಗಾಗಿ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಅವರಿಂದ ಪ್ರಶಂಸಾ ಪತ್ರವನ್ನು ಸಹ ಪಡೆದಿದ್ದಾರೆ. ಸೋಫಿಯಾ ಖುರೇಷಿ ಅವರು ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ