/newsfirstlive-kannada/media/media_files/2025/08/18/cp-radhakrishan-in-delhi-2025-08-18-17-37-10.jpeg)
ದೆಹಲಿಗೆ ಬಂದ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಹ್ಲಾದ್ ಜೋಷಿರಿಂದ ಸ್ವಾಗತ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಪರಾಷ್ಟ್ರಪತಿ ಸ್ಥಾನದ ಚುನಾವಣೆ ಗರಿಗೆದರಿದೆ. ಈಗಾಗಲೇ ಎನ್ಡಿಎ ತನ್ನ ಅಭ್ಯರ್ಥಿಯನ್ನಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಆಯ್ಕೆ ಮಾಡಿದೆ. ಎನ್ಡಿಎ ಅಭ್ಯರ್ಥಿಗೆ ಬಿಜೆಪಿಯ ಮಿತ್ರಪಕ್ಷಗಳು ಈಗಾಗಲೇ ಬೆಂಬಲ ಸೂಚಿಸಿವೆ. ಆಂಧ್ರದ ಟಿಡಿಪಿ, ಪವನ್ ಕಲ್ಯಾಣ್ ಅವರ ಜನಸೇನಾ ಪಕ್ಷ, ಮಹಾರಾಷ್ಟ್ರದ ಏಕನಾಥ್ ಶಿಂಧೆ ಹಾಗೂ ಶಿವಸೇನೆ ಪಕ್ಷಗಳು ಬೆಂಬಲ ಸೂಚಿಸಿವೆ.
ಇನ್ನೂ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರು ಮುಂಬೈನಿಂದ ದೆಹಲಿಗೆ ಆಗಮಿಸಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಎನ್ಡಿಎ ನಾಯಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿರುವ ಸಿ.ಪಿ.ರಾಧಾಕೃಷ್ಣನ್ ಅವರು ಭಾಗಿಯಾಗುವರು. ಇನ್ನೂ ಇವತ್ತು ಮಧ್ಯಾಹ್ನ ದೆಹಲಿಯಲ್ಲಿ ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ನಿವಾಸದಲ್ಲಿ ಕೇಂದ್ರ ಸಚಿವರುಗಳ ಸಭೆ ನಡೆದಿದೆ. ಈ ಸಭೆಗೆ ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು ಬಂದು ಭಾಗವಹಿಸಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಸೇರಿದಂತೆ ಎಲ್ಲರ ಜೊತೆಯೂ ನಾಮಪತ್ರ ಸಲ್ಲಿಕೆ ವಿಧಿವಿಧಾನಗಳ ಬಗ್ಗೆ ಸಿ.ಪಿ.ರಾಧಾಕೃಷ್ಣನ್ ಅವರು ಚರ್ಚೆ ನಡೆಸಿದ್ದಾರೆ.
ಇನ್ನೂ ಮುಂದೆ ಸಿ.ಪಿ.ರಾಧಾಕೃಷ್ಣನ್ ಅವರು ದೆಹಲಿಯಲ್ಲಿ ಬಿಜೆಪಿಯ ಮಿತ್ರಪಕ್ಷಗಳ ನಾಯಕರನ್ನೆಲ್ಲಾ ಭೇಟಿಯಾಗಿ ಉಪರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡಬೇಕೆಂದು ಕೋರುವರು. ಹೀಗಾಗಿ ದೆಹಲಿಯಲ್ಲಿ ಕೇಂದ್ರದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಹ್ಲಾದ್ ಜೋಷಿ ಅವರ ನಿವಾಸದಲ್ಲೇ ಉಪರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ತಂಗುವರು. ಉಪರಾಷ್ಟ್ರಪತಿ ಚುನಾವಣೆಯ ಪ್ರಕ್ರಿಯೆಗಳೆಲ್ಲಾ ಮುಗಿಯುವವರೆಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ನಿವಾಸದಲ್ಲೇ ತಂಗಲು ಸಿ.ಪಿ.ರಾಧಾಕೃಷ್ಣನ್ ನಿರ್ಧರಿಸಿದ್ದಾರೆ. ಸಿ.ಪಿ.ರಾಧಾಕೃಷ್ಣನ್ ಅವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಮ್ಮ ನಿವಾಸದಲ್ಲಿ ಅತಿಥ್ಯ ನೀಡುತ್ತಿದ್ದಾರೆ.
ಮತ್ತೊಂದೆಡೆ ಇಂಡಿಯಾ ಮೈತ್ರಿಕೂಟ ಉಪರಾಷ್ಟ್ರಪತಿ ಚುನಾವಣೆಗೆ ಇನ್ನೂ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಇಂಡಿಯಾ ಮೈತ್ರಿಕೂಟ ಕೂಡ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ. ಆದರೇ, ಯಾರು ಅನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೆಂದು ಇನ್ನೂ ನಿರ್ಧರಿಸಿಲ್ಲ. ತಮಿಳುನಾಡಿನ ಡಿಎಂಕೆ ಪಕ್ಷ, ದಕ್ಷಿಣ ಭಾರತದವರನ್ನೇ ಇಂಡಿಯಾ ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಬೇಕೆಂದು ಪಟ್ಟು ಹಿಡಿದಿದೆಯಂತೆ. ಆದರೇ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ, ರಾಜ್ಯಸಭೆ ಸದಸ್ಯರಿಗೆ ಮಾತ್ರವೇ ಮತದಾನದ ಹಕ್ಕಿದೆ. ಲೋಕಸಭೆ, ರಾಜ್ಯಸಭೆಗಳೆಡರಲ್ಲೂ ಎನ್ಡಿಎಗೆ ಬಹುಮತ ಇರುವುದರಿಂದ ಎನ್ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅನಾಯಾಸವಾಗಿ ಗೆಲುವು ಸಾಧಿಸುತ್ತಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.