/newsfirstlive-kannada/media/media_files/2025/10/16/kaveri-2025-10-16-21-45-13.jpg)
ಕರುನಾಡ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್ 17 ಅಂದರೆ ನಾಳೆ ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ತೀರ್ಥೋದ್ಭವ ಜರುಗಲಿದ್ದು ಸಹಸ್ರಾರು ಭಕ್ತರು ಅ ಪುಣ್ಯ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ. ಇದರ ಅಂಗವಾಗಿ 1 ತಿಂಗಳ ಕಾಲ ನಡೆಯುವ ಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ದಕ್ಷಿಣ ಭಾರತದ ಗಂಗೆ ಅಂತಲೇ ಪೂಜಿಸಲ್ಪಡುವ ಕನ್ನಡ ನಾಡಿನ ಜೀವ ನದಿ ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರದಲ್ಲಿ ಭರ್ಜರಿ ಸಿದ್ಧತೆ ನಡೆಯುತ್ತಿವೆ. ವರ್ಷಕ್ಕೊಮ್ಮೆ ಘಟಿಸುವ ಈ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ರಾಜ್ಯ ಹಾಗೂ ಹೊರರಾಜ್ಯದಿಂದ ಸಹಸ್ರಾರು ಸಂಖ್ಯೆಯ ಭಕ್ತರು ಆಗಮಿಸಲಿದ್ದು ಇದಕ್ಕಾಗಿ ತಲಕಾವೇರಿ ಹಾಗೂ ತ್ರಿವೇಣಿ ಸಂಗಮ ಭಾಗಮಂಡಲ ಸಕಲ ರೀತಿಯಲ್ಲಿ ಸಿದ್ದತೆ ನಡೆಯುತ್ತಿದೆ. ಹೆಚ್ಚು ಜನರು ಬರುತ್ತಿರುವ ಕಾರಣ ನೂಕುನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಹಾಗೂ ಸಿಸಿ ಕ್ಯಾಮೆರಾಗಳ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ:ಹೆಚ್ಚುವರಿ 5Kg ಅಕ್ಕಿ ಬದಲು ಸರ್ಕಾರದಿಂದ ಇಂದಿರಾ ಕಿಟ್.. ಡಿಸಿಎಂ ಡಿ.ಕೆ ಶಿವಕುಮಾರ್ ಏನಂದ್ರು?
ನಾಳೆ ಮಧ್ಯಾಹ್ನ 1:44 ಗಂಟೆಗೆ ಸಲ್ಲುವ ಮಕರ ಲಗ್ನದಲ್ಲಿ ಪವಿತ್ರ ತೀರ್ಥೋಧ್ಭವ ಜರುಗಲಿದ್ದು, 17ರ ಮುಂಜಾನೆಯಿಂದ ಭಾಗಮಂಡಲ ಹಾಗೂ ತಲಕಾವೇರಿ ಕ್ಷೇತ್ರದಲ್ಲಿ ನಾನಾ ಪೂಜಾ ಕೈಂಕರ್ಯಗಳು ನಡೆಯಲಿದೆ. ಅರ್ಚಕರ ತಂಡ ಕೂಡ ಕಾವೇರಿ ಮಾತೆಯ ಸ್ವಾಗತಕ್ಕೆ ಸಜ್ಜಾಗಿದೆ. ನಾಳೆ ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಲಿದೆ.
ಮಾತೆಯ ದರ್ಶನಕ್ಕೆ ಸಹಸ್ರ ಸಹಸ್ರ ಭಕ್ತರು ಲಗ್ಗೆಯಿಡುತ್ತಿದ್ದು ಯಾವುದೇ ರೀತಿಯಲ್ಲಿ ನೂಕುನುಗ್ಗಲು ಉಂಟಾಗದಂತೆ ಏಕಮುಖ ಸಂಚಾರದಲ್ಲಿ ಬ್ಯಾರಿಕೇಡ್ ಹಾಕಲಾಗಿದೆ. ತೀರ್ಥಸ್ವರೂಪಿಣಿಯಾದ ಕಾವೇರಿ ಮಾತೆಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದು 1 ತಿಂಗಳ ಜಾತ್ರೆಗೆ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡಿಕೊಂಡಿದೆ. ಕೊಡಗಿನ ಕುಲದೇವತೆ, ತಾಯಿ ಕಾವೇರಿ ತೀರ್ಥರೂಪಿಣಿಯಾಗಿ ನಾಡಿನ ಜನತೆಗೆ ದರ್ಶನ ನೀಡಲು ಸಜ್ಜಾಗಿದ್ದಾಳೆ. ಈ ವಿಸ್ಮಯವನ್ನ ಕಣ್ತುಂಬಿಕೊಳ್ಳಲು ಭಕ್ತಗಣ ಕಾತರರಾಗಿ ಕಾಯುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ