/newsfirstlive-kannada/media/media_files/2025/08/19/heart-attack-cases-2025-08-19-14-11-23.jpg)
ಕರ್ನಾಟಕದಲ್ಲಿ ಹೃದಯಾಘಾತದಿಂದ 3 ವರ್ಷದಲ್ಲಿ ಒಂದು ಸಾವಿರ ಮಂದಿ ಸಾವು!
ಕರ್ನಾಟಕದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಆತಂಕ ಎದುರಾಗಿತ್ತು. ವಿಶೇಷವಾಗಿ ಹಾಸನ ಜಿಲ್ಲೆಯಲ್ಲೇ ಹೃದಯಾಘಾತದಿಂದ ಹೆಚ್ಚಿನ ಜನರು ಸಾವನ್ನಪ್ಪುತ್ತಿದ್ದಾರೆ ಎಂಬುದು ದೊಡ್ಡ ಸುದ್ದಿಯಾಗಿತ್ತು. ಆದರೇ, ರಾಜ್ಯದಲ್ಲಿ ಪ್ರತಿ ವರ್ಷವೂ ಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರೋಬ್ಬರಿ ಒಂದು ಸಾವಿರ ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂಬ ಅಘಾತಕಾರಿ ಮಾಹಿತಿಯನ್ನು ರಾಜ್ಯ ಸರ್ಕಾರವೇ ರಾಜ್ಯ ವಿಧಾನ ಪರಿಷತ್ಗೆ ನೀಡಿದೆ. ಸಾವನ್ನಪ್ಪಿದವರೆಲ್ಲಾ ತೃತೀಯ ಹಂತದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಾಗ ಮತ್ತು ಹೃದಯಾಘಾತದ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವವರು. ಸಮಾಜದಲ್ಲಿ ಜನರ ಜೀವನಶೈಲಿ ಬದಲಾಗುತ್ತಿದೆ. ಇದರಿಂದ ಹೃದಯಾಘಾತದ ಕೇಸ್ ಗಳು ಹೆಚ್ಚಾಗುತ್ತಿವೆ ಎಂದು ರಾಜ್ಯ ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಬಿಜೆಪಿಯ ವಿಧಾನಪರಿಷತ್ ಸದಸ್ಯ ಹಾಗೂ ವೈದ್ಯರೂ ಆದ ಡಾ.ಧನಂಜಯ ಸರ್ಜಿ ಹಾಗೂ ಮಂಡ್ಯ ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿರುವ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಉತ್ತರ ನೀಡಿದ್ದಾರೆ.
ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ದಿನೇಶ್ ಗುಂಡೂರಾವ್
ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕಳೆದ 3 ವರ್ಷದಲ್ಲಿ ಹೃದಯಾಘಾತದಿಂದ 61,299 ಮಂದಿ ದಾಖಲಾಗಿದ್ದಾರೆ. ಇದರಲ್ಲಿ 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಹಠಾತ್ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 472 ಆಗಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿಲ್ಲ. ಆದರೆ ಕೊರೊನಾ ನಂತರ ಹೃದಯಾಘಾತದ ಭೀತಿಯಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಸಮಾಜದಲ್ಲಿ ಜನರ ಜೀವನ ಶೈಲಿಯಲ್ಲಿ ಭಾರಿ ಬದಲಾವಣೆಯಾಗುತ್ತಿದೆ. ಜೊತೆಗೆ ಆಹಾರ ಕ್ರಮದಲ್ಲೂ ಭಾರಿ ಬದಲಾವಣೆಯಾಗುತ್ತಿದೆ. ಇವುಗಳಿಂದಾಗಿ ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದು ರಾಜ್ಯ ಸರ್ಕಾರ ವಿಧಾನ ಪರಿಷತ್ ಗೆ ತಿಳಿಸಿದೆ.
ಕರ್ನಾಟಕದಲ್ಲಿ 2023-24 ರಲ್ಲಿ ಹೃದಯಾಘಾತದಿಂದ 229 ಮಂದಿ ಸಾವನ್ನಪ್ಪಿದ್ದಾರೆ. 2022-25 ರಲ್ಲಿ 608 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ 2025-26ರ ಈ ಪ್ರಸಕ್ತ ಸಾಲಿನಲ್ಲಿ ಇದುವರೆಗೂ 167 ಮಂದಿ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ವಿಧಾನಪರಿಷತ್ ಗೆ ಮಾಹಿತಿ ನೀಡಿದೆ. ಮೂರು ವರ್ಷಗಳಲ್ಲಿ 1,004 ಮಂದಿ ಸಾವನ್ನಪ್ಪಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ.