/newsfirstlive-kannada/media/media_files/2025/09/16/rb_timmapur_krishna-2025-09-16-23-06-15.jpg)
ಬೆಂಗಳೂರು: ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಸಂಬಂಧ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಹಲವು ವರ್ಷಗಳ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ ಎಂದು ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪೂರ ಅವರು ಖುಷಿ ವ್ಯಕ್ತಪಡಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆಯ ಹಿನ್ನೀರಿನಲ್ಲಿ ಮುಳುಗಡೆಯಾಗುವ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ 40 ಲಕ್ಷ ರೂಪಾಯಿ, ಒಣಭೂಮಿಗೆ 30 ಲಕ್ಷ ರೂಪಾಯಿ ಕೊಡಬೇಕು ಎಂದು ಬೇಡಿಕೆ ಇಡಲಾಗಿತ್ತು. ಇದಕ್ಕೆ ರಾಜ್ಯ ಸರ್ಕಾರ ನೀರಾವರಿ ಜಮೀನಿಗೆ 40 ಲಕ್ಷ ರೂಪಾಯಿ, ಒಣಭೂಮಿಗೆ 30 ಲಕ್ಷ ರೂಪಾಯಿ ಕೊಡಬೇಕು ಎಂದು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಜೊತೆಗೆ ಕಾಲುವೆ ನೀರ್ಮಾಣಕ್ಕೆ ಭೂಮಿ ಕಳೆದುಕೊಳ್ಳುವ ರೈತರ ನೀರಾವರಿ ಜಮೀನಿಗೆ 30 ಲಕ್ಷ ರೂಪಾಯಿ, ಒಣಭೂಮಿಗೆ 25 ಲಕ್ಷ ರೂಪಾಯಿ ನೀಡಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ ಎಂದು ಸಚಿವ ತಿಮ್ಮಾಪೂರ ಅವರು ಹೇಳಿದ್ದಾರೆ.
ಆಲಮಟ್ಟಿ ಜಲಾಶಯವನ್ನು 519 ರಿಂದ 524 ಮೀಟರ್ ರವರೆಗೂ ಎತ್ತರಿಸುವುದರಿಂದ 75 ಸಾವಿರಕ್ಕೂ ಹೆಚ್ಚು ಎಕರೆ ಜಮೀನು ಹಿನ್ನೀರಿನಲ್ಲಿ ಮುಳುಗಡೆಯಾಗಲಿದೆ. ಒಂದೇ ಹಂತದಲ್ಲಿ ಭೂಸ್ವಾಧೀನ ಖರೀದಿ ಮೂಲಕ ಸ್ವಾಧೀನಕ್ಕೆ ತೀರ್ಮಾನ ಮಾಡಲಾಗಿದೆ.
ಇದನ್ನೂ ಓದಿ: ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅರೆಸ್ಟ್.. ವಿಚಾರಣೆಗೆ ಕರೆದು ಇಡಿ ಬಂಧನ
ಹಿಂದಿನ ಸರ್ಕಾರದಲ್ಲಿ ಒಣಭೂಮಿಗೆ 20 ಲಕ್ಷ ರೂಪಾಯಿ, ನೀರಾವರಿಗೆ 24 ಲಕ್ಷ ರೂಪಾಯಿ ತೀರ್ಮಾನ ಮಾಡಿತ್ತು. ಆದರೆ ರೈತರು ಒಪ್ಪಿರಲಿಲ್ಲ. ಹಾಗಾಗಿ, ರೈತ ಸಂಘಟನೆಗಳು, ಎಲ್ಲಾ ಪಕ್ಷದ ಶಾಸಕರೊಂದಿಗೆ ಸಿಎಂ ಮತ್ತು ಡಿಸಿಎಂ ಹಲವು ಸಭೆ ನಡೆಸಿ, ಅಭಿಪ್ರಾಯ ಪಡೆದಿದ್ದರು. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಇವತ್ತಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗಿದೆ.
ಇದರಿಂದ ನಮ್ಮ ಭಾಗದ ಜನರಿಗೆ ಸಂತಸ ಆಗಲಿದೆ. ನುಡಿದಂತೆ ನಡೆಯುವುದು ನಮ್ಮ ಸರ್ಕಾರ. ಜನರಿಗೆ ನೀಡಿದ್ದ ಭರವಸೆಯಂತೆ ಈಡೇರಿಸಲಾಗುತ್ತಿದೆ. ಹುಟ್ಟುಹಬ್ಬದ ದಿನದಂದೇ ನಮ್ಮ ಭಾಗದ ಜನರ ಹೋರಾಟಕ್ಕೆ ಫಲ ಸಿಕ್ಕಿರುವುದು ಮತ್ತಷ್ಟು ನನಗೆ ಸಂತಸ ತಂದಿದೆ ಎಂದು ಸಚಿವ ತಿಮ್ಮಾಪೂರ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ