ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌, ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿಗೆ ಸಿ.ಎಂ ಸೂಚನೆ

ಕರ್ನಾಟಕದಲ್ಲಿ ಹನುಮ ಹುಟ್ಟಿದ ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ, ಪೌರಾಣಿಕ, ಆಧ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ದಿ ಮಾಡಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ದಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆದಿದೆ.

author-image
Chandramohan
ANJANDRI HILL CM MEETING02

ಅಂಜನಾದ್ರಿ ಬೆಟ್ಟ ಅಭಿವೃದ್ದಿಪಡಿಸಲು ಸಿಎಂ ಸೂಚನೆ

Advertisment
  • ಅಂಜನಾದ್ರಿ ಬೆಟ್ಟ ಅಭಿವೃದ್ದಿಪಡಿಸಲು ಸಿಎಂ ಸೂಚನೆ
  • ಆಧ್ಯಾತ್ಮಿಕ, ಪೌರಾಣಿಕ ಮಹತ್ವ ತಿಳಿಸುವ ರೀತಿ ಅಭಿವೃದ್ದಿಪಡಿಸಿ-ಸಿಎಂ
  • ಪ್ರವಾಸೋದ್ಯಮ ಕ್ಷೇತ್ರವಾಗಿಯೂ ಅಭಿವೃದ್ದಿಪಡಿಸಲು ಸಿಎಂ ಸೂಚನೆ

ಕೊಪ್ಪಳ ಜಿಲ್ಲೆಯಲ್ಲಿರುವ  ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌, ಪೌರಾಣಿಕ, ಅಧ್ಯಾತ್ಮಿಕ ಮಹತ್ವ ತಿಳಿಸುವ ರೀತಿಯಲ್ಲಿ ಅಭಿವೃದ್ಧಿಪಡಿಸಲು  ಸಿ.ಎಂ. ಸಿದ್ದರಾಮಯ್ಯ ವಿವಿಧ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳಿಗೆ  ಸೂಚನೆ ನೀಡಿದ್ದಾರೆ. ವಯಸ್ಕರೂ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆದಿದೆ. 
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆದಿದೆ. 
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ.ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ  ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ , ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿ ಕ್ಷೇತ್ರದ  ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಬೇಕಿದೆ. ಅಂಜನಾದ್ರಿ  ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.

ANJANDRI HILL CM MEETING



ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77 ಎಕರೆ ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.
 ಆದ್ದರಿಂದ,  ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101 ಎಕರೆ  ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ. ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ  ಕ್ರಮಗಳನ್ನು ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣ ಕಾಮಗಾರಿ

2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ. ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ  ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ. 

ANJANDRI HILL DEVELOPMENT MEETING
Advertisment